ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂ.43ರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ವಿರುದ್ಧ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಕಾಪಸೆ ಅವರ ವಿರುದ್ಧ ಮೂಲಭೂತ ಸೌಲಭ್ಯಗಳ ಕಲ್ಪಿಸುವಲ್ಲಿ ವಿಫಲ, ಜಾತಿ ಆಧಾರಿತ ನಿಂದನೆ ಮಾಡುತ್ತಿದ್ದಾರೆಯೆಂಬ ಆರೋಪ ವಿದ್ಯಾರ್ಥಿಗಳಿಂದ ಕೇಳಿಬಂದಿದೆ.
ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ನಂತರ ಅವರು ಮಕ್ಕಳೊಂದಿಗೆ ಮಾತನಾಡಿ ವಿಷಯ ಕುರಿತು ವಿವರ ಪಡೆದಿದ್ದಾರೆ. “ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು,” ಎಂದು ಬಡದಾನಿ ಹೇಳಿದ್ದಾರೆ. ಇದೇ ವೇಳೆ, ವಿದ್ಯಾರ್ಥಿಗಳು ನವನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿ ಮುಖ್ಯ ಶಿಕ್ಷಕಿಯನ್ನು ಅಮಾನತ್ತು ಮಾಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.





